ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಿದ ಶಾಸಕ ಉಮೇಶ್ ಮೇಟಿ
ಬಾಗಲಕೋಟ : ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯ ಸರಕಾರ ಜಾರಿಗೆ ತಂದಿರುವ ಉಚಿತ ಬಸ್ಪಾಸ್ ಯೋಜನೆಯಡಿ ಶಾಸಕ ಉಮೇಶ ಮೇಟಿ ಅವರು ಸೋಮವಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವಿತರಿಸಿದರು.
ಬಾಗಲಕೋಟೆ ಹಳೆ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಉಚಿತ ಬಸ್ಪಾಸ್ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಬಸ್ ಪಾಸ್ಗಳನ್ನು ವಿತರಿಸಿ ಮಾತನಾಡಿದ ಶಾಸಕರು ಅವರು ವಿದ್ಯಾರ್ಥಿಗಳು ನಮ್ಮ ದೇಶದ ಭವಿಷ್ಯವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಸಾರಿಗೆ ವೆಚ್ಚ ದೊಡ್ಡ ಸವಾಲಾಗಿದ್ದು, ಉಚಿತ ಬಸ್ ಪಾಸ್ ಯೋಜನೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಶಿಕ್ಷಣವೇ ಸಮಾಜದ ಅಭಿವೃದ್ದಿಗೆ ಅಡಿಪಾಯವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಪೋಷಕರು ಸಹ ತಮ್ಮ ಮಕ್ಕಳ ವಿದ್ಯಾಬ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ರಾಜ್ಯ ಸರಕಾರವು ಶಿಕ್ಷಣ, ಯುವಜನತೆ ಮತ್ತು ಮಹಿಳೆಯರ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. ವಿದ್ಯಾರ್ಥಿಗಳ ಕಲಿಕೆಯ ಹಾದಿಯನ್ನು ಸುಗಮಗೊಳಿಸಲು ಇಂತಹ ಯೋಜನೆಗಳು ನಿರಂತರವಾಗಿ ಜಾರಿಯಾಗುತ್ತಿವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಬೇಕು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನೀಕುಮಾರ ದಡ್ಡಿ ಮಾತನಾಡಿ ಆರ್ಥಿಕವಾಗಿ ಹಿಂದುಳಿದ ಕುಟಂಬಗಳ ವಿದ್ಯಾರ್ಥಿಗಳಿಗೆ ಈ ಯೋಜನೆ ನೆರವಾಗಲಿದೆ. ಶಿಕ್ಷಣವೇ ಸಮಾಜದ ಅಭಿವೃದ್ದಿಗೆ ಮೂಲ ಆಧಾರವಾಗಿದ್ದು, ವಿದ್ಯಾರ್ಥಿಗಳು ಲಭ್ಯವಿರುವ ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದವರಿಗೆ ವಿದ್ಯಾರ್ಥಿಗಳ ಖಾತೆಗೆ ಮರಳಿ ಜಮೆ ಮಾಡಲಾಗುತ್ತಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರು ಆನ್ಲೈನ್ ಮೂಲಕ ಅರ್ಜಿ ಹಾಕಿ ಉಚಿತ ಬಸ್ಪಾಸ್ ಪಡೆದುಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಬುಡಾದ ಅಧ್ಯಕ್ಷ ಅಬ್ದುಲ್ರಜಾಕ ಬೇನೂರ, ತಹಶೀಲ್ದಾರ ವಾಸುದೇವ ಸ್ವಾಮಿ, ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎನ್.ಟಿ.ಪಾಟೀಲ, ಗ್ರೇಡ್-೨ ತಹಶೀಲ್ದಾರ ಬಿರಾದಾರ, ತಾಲೂಕಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಸ್.ಎಂ.ರಾಂಪೂರ, ಸದಸ್ಯ ಶ್ರವಣ ಖಾತೇದಾರ, ಬಾಗಲಕೋಟೆ ಡಿಪೋ ಮ್ಯಾನೇಜರ್ ಚವ್ಹಾಣ ಸೇರಿದಂತೆ ನಾಗರಾಜ ಹದ್ಲಿ, ರಾಜು ಮನ್ನಿಕೇರಿ, ದ್ಯಾಮಣ್ಣ ಗಾಳಿ ಹಾಗೂ ಇತರರು ಉಪಸ್ಥಿತರಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ