ಪತ್ರಕರ್ತರ ಸೇವೆ ಪ್ರಜಾಪ್ರಭುತ್ವದ ಭದ್ರ ಅಡಿಪಾಯ – ಉಮೇಶ್ ಮೇಟಿ
ಬಾಗಲಕೋಟೆ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಜವಾಬ್ದಾರಿಯುತ ವೃತ್ತಿಯಾಗಿದ್ದು, ಪತ್ರಕರ್ತರು ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಹೇಳಿದರು. ನಗರದ ನೂತನ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪತ್ರಕರ್ತರು ತಮ್ಮ ಕುಟುಂಬಕ್ಕಿಂತ ಸಮಾಜದ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಿ ಹಗಲಿರುಳು ಸೇವೆ ಸಲ್ಲಿಸುತ್ತಾರೆ. ಅಂತಹ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಅವರ ಶೈಕ್ಷಣಿಕ ಬದುಕಿಗೆ ಮತ್ತಷ್ಟು ಪ್ರೇರಣೆ ನೀಡುವ ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಜಿಲ್ಲೆಯ ಹಿರಿಯ ಪತ್ರಕರ್ತರಾದ ದಿವಂಗತ ರಾಮ ಮನಗೂಳಿ, ದಿವಂಗತ ಶ್ರೀಶೈಲ ಅಂಗಡಿ ಸೇರಿದಂತೆ ಹಿರಿಯರ ಹೆಸರಿನಲ್ಲಿ ಅತ್ಯುತ್ತಮ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಅವರ ಸೇವೆಯನ್ನು ಸ್ಮರಿಸುವ ಜೊತೆಗೆ ಯುವ ಪತ್ರಕರ್ತರಿಗೆ ಸ್ಫೂರ್ತಿ ನೀಡುವ ಕಾರ್ಯವಾಗಿದೆ. ಪತ್ರಿಕೆ ವಿತರಕರ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ಸಹ ಅಭಿನಂದನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮ ತಂದೆ ದಿವಂಗತ ಎಚ್.ವೈ. ಮೇಟ...