ಕಾರ್ಮಿಕರ ವಲಸೆ ತಪ್ಪಿಸುವುದು ನಮ್ಮ ಆದ್ಯತೆ: ಶಾಸಕ ಮೇಟಿ
ಬಾಗಲಕೋಟ, ಜು. 18: ಬೆಣ್ಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ಕು ಮುಳುಗಡೆ ಗ್ರಾಮಗಳ ಕೂಲಿ ಕಾರ್ಮಿಕರು ತಿಮ್ಮಾಪುರ ಗ್ರಾಮದಲ್ಲಿ ಶಾಸಕ ಉಮೇಶ್ ಎಚ್. ಮೇಟಿ ಅವರನ್ನು ಭೇಟಿ ಮಾಡಿ ಉದ್ಯೋಗ ಕಲ್ಪಿಸುವಂತೆ ಮನವಿ ಸಲ್ಲಿಸಿದರು.
VB-G RAM G ಯೋಜನೆಯಡಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಉದ್ಯೋಗ ದೊರೆಯುತ್ತಿಲ್ಲ ಎಂದು ಕಾರ್ಮಿಕರು ಅಳಲು ತೋಡಿಕೊಂಡರು. ಅಲ್ಲದೆ, ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಕೆರೆಗಳ ಹೂಳು ತೆಗೆಯುವ ಕಾಮಗಾರಿಗಳನ್ನು ಕೈಗೊಂಡು ಸ್ಥಳೀಯ ಕೂಲಿ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಶಾಸಕ ಉಮೇಶ್ ಎಚ್. ಮೇಟಿ ಮಾತನಾಡಿ, "ಕೂಲಿ ಕಾರ್ಮಿಕರ ವಲಸೆ ತಪ್ಪಿಸುವುದು ನಮ್ಮ ಆದ್ಯತೆಯಾಗಿದೆ. ಯಾವುದೇ ಕುಟುಂಬ ಉದ್ಯೋಗಕ್ಕಾಗಿ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನಿಯಮಾನುಸಾರ ಉದ್ಯೋಗ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು," ಎಂದು ಭರವಸೆ ನೀಡಿದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ