ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಶಿಕ್ಷಣ ಪಡೆದು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕು:ಶಾಸಕ ಉಮೇಶ್ ಮೇಟಿ
ಮಕ್ಕಳ ಭವಿಷ್ಯಕ್ಕೆ ಭದ್ರ ಅಡಿಪಾಯ – ಶಾಸಕ ಉಮೇಶ ಮೇಟಿ
ಬಾಗಲಕೋಟೆ, ಆ. 8: ಮಗುವಿನ ಭವಿಷ್ಯ ರೂಪುಗೊಳ್ಳುವುದು ಪ್ರಾಥಮಿಕ ಶಿಕ್ಷಣದ ಹಂತದಲ್ಲಿಯೇ. ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವುದರಿಂದ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಭದ್ರ ಅಡಿಪಾಯ ಸಿಗಲಿದ್ದು, ಇದು ಸರ್ಕಾರದ ಮಹತ್ವದ ಶಿಕ್ಷಣ ಸುಧಾರಣೆಯ ಹೆಜ್ಜೆಯಾಗಿದೆ ಎಂದು ಶಾಸಕ ಉಮೇಶ ಮೇಟಿ ಹೇಳಿದರು.
ತಾಲೂಕಿನ ತಾಳಿಗಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಲಾದ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮವು ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನಾ ಗೀತೆ ಹಾಡುವುದರ ಮೂಲಕ ಆರಂಭವಾಯಿತು. ಬಳಿಕ ಆಗಮಿಸಿದ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಲು ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಹಾಗೂ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲಿದೆ. ಶಿಕ್ಷಕರ ಸಮರ್ಪಿತ ಸೇವೆಯಿಂದ ಮಕ್ಕಳು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲಿದ್ದಾರೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಶಿಕ್ಷಣ ಪಡೆದು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಈರಯ್ಯ ಹಿರೇಮಠ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸಂತಪ್ಪ ಮೇಟಿ, ಪರಶುರಾಮ ಜೋಗಿ, ಮುತ್ತಪ್ಪ ಹುಗ್ಗಿ, ಶ್ರೀಕರ್ ದೇಸಾಯಿ, ವೈ. ವೈ. ತಿಮ್ಮಾಪುರ, ಆರ್. ಎ. ಪಟ್ಟಣದ, ಎನ್. ಜಿ. ಕೋಟಿ, ಪವನ್ ಅಜ್ಜರ್, ಲಕ್ಷ್ಮಣ ದಡ್ಡಿ, ಮಾಂತೇಶ್ ಹೊಸಗೌಡ್ರು, ಎಸ್. ಎಚ್. ಬೀರಣ್ಣವರ, ಗಣೇಶ್ ಪತ್ತಾರ್, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಎಸ್ಡಿಎಂಸಿ ಸದಸ್ಯರು, ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ